Thursday, June 25, 2015

ಜಿಹ್ವಾಚಾಪಲ್ಯ ವೃದ್ಧಿಸುವ ರುಚಿವರ್ಧಕ

               ಬಸ್ಸಿನ ಮುಂದಿನ ಆಸನದಲ್ಲಿದ್ದ ಅಡುಗೆ ವಿಶೇಷಜ್ಞರ ಮಾತಿಗೆ ಕಿವಿಯೊಡ್ಡಬೇಕಾದ ಪ್ರಮೇಯ ಬಂತು. ಅವರಿಬ್ಬರು ದೊಡ್ಡ ಸಮಾರಂಭಗಳ ಅಡುಗೆಯ ಜವಾಬ್ದಾರಿಯನ್ನು ನಿಭಾಯಿಸಿದ ಅನುಭವಿಗಳೆಂದು ಅರಿತುಕೊಂಡೆ. ಒಬ್ಬರೆಂದರು, "ಮೊನ್ನೆ ಎರಡು ಸಾವಿರ ಮಂದಿಯ ಅಡುಗೆಗೆ ಶಹಬ್ಬಾಸ್ ಸಿಕ್ಕಿದ್ದೇ ಸಿಕ್ಕಿದ್ದು. ಯಾವಾಗಲೂ ಹಾಕುವುದಕ್ಕಿಂತ ಸ್ವಲ್ಪ ಹೆಚ್ಚೇ ಟೇಸ್ಟ್ ಮೇಕರ್ ಹಾಕಿದ್ದೆ", ಎಂದಾಗ ಇನ್ನೊಬ್ಬರು ದನಿ ಸೇರಿಸಿದರು, "ಅಂಗಡಿಯಲ್ಲಿ ಟೇಸ್ಟ್ ಮೇಕರ್ ಅಂತ ಕೇಳಿದ್ರೆ ಆಯಿತು, ಏನೋ ಬಿಳಿ ಪುಡಿ ಕೊಡ್ತಾರೆ. ಅದು ಎಂತಾದ್ದು ಅಂತ ಗೊತ್ತಿಲ್ಲ. ಈಚೆಗೆ ಎಲ್ಲರೂ ಹಾಕ್ತಾರೆ, ನಾನ್ಯಾಕೆ ಹಾಕಬಾರ್ದು? ಆ ಪುಡಿ ಹಾಕಿದರೆ ಸಾರು, ಸಾಂಬಾರಿನ ರುಚಿಯೇ ಬೇರೆ. ಯಾರಿಗೂ ಗೊತ್ತಾಗಬಾರದಷ್ಟೇ."
                ದಂಗಾಗುವ ಸರದಿ ನನ್ನದು. ಹೋಟೆಲ್, ಉದ್ಯಮಗಳಲ್ಲಿ ರುಚಿವರ್ಧಕಯೆನ್ನುವ ರಾಸಾಯನಿಕ  ಬಳಸುವುದನ್ನು ಕಿವುಡಾಗಿ, ಕುರುಡಾಗಿ ಒಪ್ಪಿಕೊಂಡಾಗಿದೆ. ಸಮಾರಂಭಗಳಿಗೆ ಉಣಿಸುವ ಅಡುಗೆ ಸೂಪಜ್ಞರು ಕೂಡಾ ಬಳಸುತ್ತಾರೆನ್ನುವುದು (ಎಲ್ಲರೂ ಅಲ್ಲ) ಇಂದಷ್ಟೇ ತಿಳಿಯಿತು. ಸಮಾರಂಭಗಳು ಅಧಿಕವಾಗುತ್ತಾ ಬಂದ ಹಾಗೆ ಸೂಪಜ್ಞರಲ್ಲೂ ತಮ್ಮದೇ ಕೈರುಚಿ ಮೇಲುಗೈಯಾಗಬೇಕೆನ್ನುವ ಪೈಪೋಟಿ. ಒಂದು ಸಮಾರಂಭದಲ್ಲಿ ಅಡುಗೆ ಸೈ ಎನಿಸಿದರೆ ಮತ್ತೊಂದು ಅಡುಗೆ ಹುಡುಕಿಕೊಂಡು ಬರುತ್ತದೆ. ಇದಕ್ಕಾಗಿ ಸೂಪಜ್ಞರು ಪಾಲಿಸುವ ಉಪಾಯ - ಅಡುಗೆಗೆ ಟೇಸ್ಟ್ ಮೇಕರ್ ಬಳಕೆ.  ಈ ರುಚಿವರ್ಧಕವನ್ನು ಮನೆಯ ಯಜಮಾನನ ಗಮನಕ್ಕೆ ತಾರದೇ ಸ್ವತಃ ಒಯ್ಯುತ್ತಾರೆ. ಬಳಸುತ್ತಾರೆ.
                ಸಮಾರಂಭಗಳಲ್ಲಿ ಐನೂರು, ಸಾವಿರ, ಎರಡು ಸಾವಿರ ಮಂದಿಗೆ ಅಡುಗೆ ಮಾಡಬೇಕೆಂಬಾಗ ತರಕಾರಿ, ಜೀನಸುಗಳಿಗೆ ಸಹಜವಾಗಿ ಮಾರುಕಟ್ಟೆಯನ್ನು ಅವಲಂಬಿಸಬೇಕು. ಮಾರುಕಟ್ಟೆಯ ತರಕಾರಿ ಅಂದಾಗ ಅದು ರಾಸಾಯನಿಕದಲ್ಲಿ ಮಿಂದೆದ್ದು ಬಂದವುಗಳೆಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಅಕ್ಕಿಯಿಂದ ಉಪ್ಪಿನ ತನಕ ಸಾಚಾತನಕ್ಕೆ ಪ್ರತ್ಯೇಕ ಪರೀಕ್ಷೆ ಬೇಕಾಗುವ ಕಾಲಮಾನ. ಇವುಗಳೊಂದಿಗೆ ಉದರಕ್ಕಿಳಿಯುವ ಖಾದ್ಯಗಳಿಗೂ ಈಗ ರುಚಿವರ್ಧಕದ ಸ್ಪರ್ಶ!  ಕಾರ್ಬ್ಯೆೈಡ್ ಹಾಕಿ ದಿಢೀರ್ ಹಣ್ಣು ಮಾಡಿದ ಬಾಳೆಹಣ್ಣುಗಳು ಭೋಜನದೊಂದಿಗೆ ಬೋನಸ್. ಉಚಿತವಾಗಿ ಕೊಡುವ ಐಸ್ಕ್ರೀಂನಲ್ಲಿ ಇನ್ನು ಏನೆಲ್ಲಾ ಇವೆಯೋ ಗೊತ್ತಿಲ್ಲ. ಹಾಗೆಂತ ರುಚಿವರ್ಧಕ ಬಳಸದೆ ತಮ್ಮ ಅನುಭವ ಮತ್ತು ಕೈಗುಣದಿಂದ ಶುಚಿರುಚಿಯಾದ ಭೋಜನವನ್ನು ಸಿದ್ಧಪಡಿಸುವ ಸೂಪಜ್ಞರು ಎಷ್ಟು ಮಂದಿ ಇಲ್ಲ.
                ಮ್ಯಾಗಿ ನಿಷೇಧದ ಕಾವು ದೇಶವಲ್ಲ, ವಿಶ್ವಾದ್ಯಂತ ಕಂಪನ ಮೂಡಿಸಿದೆ. ಅದರಲ್ಲಿ ಅಗತ್ಯಕ್ಕಿಂತ ಹೆಚ್ಚಿರುವ ಸೀಸ, ರುಚಿವರ್ಧಕವು ಉದ್ಯಮದ ಅಡಿಗಟ್ಟನ್ನು ಅಲ್ಲಾಡಿಸಿದೆ. ಕೋಟಿಗಟ್ಟಲೆ ಉತ್ಪನ್ನ ಬೆಂಕಿಗಾಹುತಿಯಾಗಿದೆ.  ಜಾಹೀರಾತುಗಳ ಮೂಲಕ ನಂಬಿಸಿದ ಸಂಸ್ಥೆಯು ವಿಶ್ವಾಸ ಕಳೆದುಕೊಂಡಿದೆ. ತಿನ್ನುವ ಎಲ್ಲಾ ವಸ್ತುಗಳನ್ನು ಸಂಶಯ ದೃಷ್ಟಿಯಿಂದ ನೋಡುವ ಸ್ಥಿತಿ ರೂಪುಗೊಂಡಿದೆ. ಸೇಬು- ದ್ರಾಕ್ಷಿಯೊಳಗಿರುವ ರಾಸಾಯನಿಕ, ಹಾರ್ಮೋನುಗಳ ಕುರಿತು, ಕಲ್ಲಂಗಡಿಗೆ ಇಂಜೆಕ್ಟ್ ಮಾಡುವ ವಿವಿಧ ಮುಖಗಳನ್ನು ವಾಹಿನಿಗಳು ಪ್ರಸಾರ ಮಾಡುತ್ತಲೇ ಇವೆ. ರಾಸಾಯನಿಕ ಸಿಂಪಡಣೆಗಳ ಕರಾಳ ಮುಖಗಳತ್ತ ವಿವಿಧ ಮಾಧ್ಯಮಗಳು ಬೊಬ್ಬಿಡುತ್ತಿವೆ.  ಮ್ಯಾಗಿಯಲ್ಲಿರುವ ಅಕರಾಳ ವಿಕಾರಳ ಮುಖದ ದರ್ಶನವಾದಾಗ ಈ ಎಲ್ಲಾ ವಿಚಾರಗಳತ್ತ ತಿಳಿಯಲು ಈಗಲಾದರೂ ಮೈಕೊಡವಿ ಎದ್ದೇವಲ್ಲಾ!
                   ತಮಿಳುನಾಡಿನಿಂದ ಬರುವ ತರಕಾರಿಗಳಿಗೆ ಕೇರಳ ರಾಜ್ಯವು ಅವಲಂಬಿತ. ನಿರ್ವಿಷ ಆಹಾರದ ಕುರಿತು ಕೇರಳದಲ್ಲಿ ವ್ಯಾಪಕವಾಗಿ ಅರಿವು ಮೂಡಿಸುವ ಕೆಲಸವನ್ನು ಸರಕಾರ ಮತ್ತು ಖಾಸಗಿ ಸಂಸ್ಥೆಗಳು ಮಾಡುತ್ತಾ ಇವೆ. ಆರೋಗ್ಯ ಕಾಳಜಿಯಿದ್ದ  ಮಂದಿ ಸಾವಯವಕ್ಕೆ ಬದಲಾಗುತ್ತಿದ್ದಾರೆ. ಸ್ವಾವಲಂಬನೆಯತ್ತ ಹೊರಳುತ್ತಿದ್ದಾರೆ. ಕೈತೋಟಗಳನ್ನು ಎಬ್ಬಿಸುವ ಮನಃಸ್ಥಿತಿ ನಿರ್ಮಾಣವಾಗುತ್ತಿದೆ. ಮಾವು, ಹಲಸು, ಗೆಡ್ಡೆ, ಎಲೆಗಳು ತರಕಾರಿಯಾಗಿ ಉದರ ಸೇರುತ್ತಿದೆ. "ರಾಸಾಯನಿಕದ ಪರಿಣಾಮ ಜನರ ಮೇಲೆ ಎಷ್ಟು ಪರಿಣಾಮ ಬೀರಿದೆ ಎಂದರೆ, ಹೊರ ರಾಜ್ಯಗಳಿಂದ ತರಕಾರಿಯನ್ನು ತರಿಸದೇ ಇರಲು ಕೆಲವು ವ್ಯಾಪಾರಿಗಳು ನಿರ್ಧರಿಸಿದ್ದಾರೆ," ಎನ್ನುತ್ತಾರೆ ಕಾಸರಗೋಡಿನ ಕೃಷಿಕ ಗೋಪಾಲ ರಾವ್.
                     ಮುಖ್ಯವಾಗಿ ಟೊಮೆಟೋ, ದೊಣ್ಣೆಮೆಣಸು, ಕ್ಯಾಬೇಜ್, ಹೂಕೋಸುಗಳಿಗೆ ಸುಮಾರು ಹತ್ತಕ್ಕೂ ಹೆಚ್ಚು ಬಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತದೆ ಎಂದು ಕೃಷಿಕ ಮಿತ್ರರನೇಕರು ಹೇಳಿಕೊಂಡಿದ್ದಾರೆ. ಯಾವ್ಯಾವ ಕೃಷಿಗೆ ಎಂತಹ ವಿಷವನ್ನು ಸಿಂಪಡಣೆ ಮಾಡಬೇಕೆಂದು ಅಂಗಡಿಯಾತನೇ ಬೋಧನೆ ಮಾಡುತ್ತಾನೆ. ಕೊನೆಗೆ ಎಷ್ಟು ಪ್ರಮಾಣದಲ್ಲಿ ಸಿಂಪಡಣೆ ಮಾಡಬೇಕೆಂಬ ಡೋಸೇಜನ್ನೂ ಹೇಳುತ್ತಾರೆ. ಇಂತಹ ವ್ಯವಹಾರವನ್ನು ಕಣ್ಣಾರೆ ನೋಡಿದ ಬಳಿಕ ಈ ನಾಲ್ಕು ಉಗ್ರರಿಗೆ ನಾನಂತೂ ವಿದಾಯ ಹೇಳಿದ್ದೇನೆ!
                  ಕನ್ನಾಡಿನಲ್ಲಿ ಸಾವಯವದ ಅರಿವು ಈಗಲ್ಲ ದಶಕದೀಚೆಗೆ ಪ್ರಚಾರವಾಗುತ್ತದಷ್ಟೇ ಹೊರತು ಅದು ಮನಸ್ಸಿಗೆ ಇಳಿದಿರುವುದು ತೀರಾ ಕಡಿಮೆ. ಆಹಾರದಲ್ಲಿ ವಿಷದ ಪ್ರಮಾಣಗಳು ಪತ್ತೆಯಾಗುತ್ತಲೇ ಇದ್ದಂತೆ ನಿರ್ವಿಷ ಆಹಾರಗಳ ಹುಡುಕಾಟದತ್ತ, ಬೆಳೆಯುವತ್ತ ಯೋಜನೆ, ಯೋಚನೆಗಳು ಹೆಜ್ಜೆಯೂರಿವೆ. ಸಮಾನಾಸಕ್ತ ಸಂಘಟನೆಗಳು ನಗರಗಳಲ್ಲಿ ಸಾವಯವದ ಮಹತ್ವ, ನಿರ್ವಿಷ ಆಹಾರದ ಅಪಾಯಗಳತ್ತ ಅರಿವು ಚೆಲ್ಲುವ ಕೆಲಸವನ್ನು ಸದ್ದಿಲ್ಲದೆ ಮಾಡುತ್ತಿದ್ದಾರೆ. ಪಾಲಿಶ್ ಮಾಡದ ಅಕ್ಕಿಯನ್ನು ಅರಸಿ ಬರುವ, ವಿಳಾಸ ಕೇಳುವ ಅಮ್ಮಂದಿರು ಎಚ್ಚರವಾಗಿದ್ದಾರೆ. ಮ್ಯಾಗಿ ನಿಷೇಧದ ಬಳಿಕವಂತೂ ಇಂತಹ ಪ್ರಕ್ರಿಯೆ ತೀವ್ರವಾಗಿದೆ.
                    ಮೂಲಿಕಾ ತಜ್ಞ ಪಾಣಾಜೆಯ ವೆಂಕಟ್ರಾಮ ದೈತೋಟ ಎಚ್ಚರಿಸುತ್ತಾರೆ, "ನಿರ್ವಿಷ ಆಹಾರದ ಕಾಳಜಿ ಎಲ್ಲಿಯವರೆಗೆ ನಮಗೆ ಬರುವುದಿಲ್ಲವೋ ಅಲ್ಲಿಯವರೆಗೆ ಖಾಯಿಲೆಗಳು ತಪ್ಪಿದಲ್ಲ. ಆಹಾರವೇ ಔಷಧಿಯಾಗಬೇಕು. ಈಗೆಲ್ಲವೂ ತಿರುಗುಮುರುಗು. ರಾಸಾಯನಿಕ ರಹಿತವಾದ ಆಹಾರದ ಸೇವನೆಯಿಂದ ಕಾಯಿಲೆಗಳನ್ನು ದೂರವಿಡಬಹುದು." ವೆಂಕಟ್ರಾಮದ ಕಿವಿಮಾತಿಗೆ ನಮ್ಮ ಹಿರಿಯರ ಬದುಕು ಆದರ್ಶವಾಗಿತ್ತು.
                ವಿವಿಧ ರೂಪಗಳಲ್ಲಿ ರಾಸಾಯನಿಕಗಳನ್ನು ಗೊತ್ತಿಲ್ಲದೆ ಬದುಕಿನಂಗವಾಗಿ ಸ್ವೀಕರಿಸಿದ್ದೇವೆ. ಗೊತ್ತಾದ ಬಳಿಕ ದೂರವಿರುವುದರಲ್ಲಿ ಆರೋಗ್ಯ ಭಾಗ್ಯ. ತಕ್ಷಣ ಎಲ್ಲವನ್ನೂ ವಜ್ರ್ಯ ಮಾಡಲಸಾಧ್ಯ. ಹಂತ ಹಂತವಾಗಿ ಪ್ರಮಾಣವನ್ನು ಕಡಿಮೆಗೊಳಿಸುವುದರಿಂದ ಒಂದಷ್ಟು ದಿವಸ ಹೆಚ್ಚು ಬಾಳಬಹುದೇನೋ? ನಿರ್ವಿಷವಾಗಿ ಕೃಷಿ ಉತ್ಪನ್ನಗಳನ್ನು ಬೆಳೆದುಕೊಡುವ ಕೃಷಿಕರನ್ನು ಪ್ರೋತ್ಸಾಹಿಸೋಣ.

0 comments:

Post a Comment