Thursday, December 27, 2018

ಮೊಂಟೆಪದವು ಲಕ್ಷ್ಮೀ ಪರಮೇಶ್ವರ ಕಾರಂತ ವಿಧಿವಶ


           ಬಂಟ್ವಾಳ ತಾಲೂಕಿನ ಮೊಂಟೆಪದವು ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ 'ಲಕ್ಷ್ಮೀ ಟೀಚರ್' ಎಂದೇ ಪರಿಚಿತರಾಗಿದ್ದ ಲಕ್ಷ್ಮೀ ಪರಮೇಶ್ವರ ಕಾರಂತ (79) ಇವರು 2018 ದಶಂಬರ 25ರಂದು ವಿಧಿವಶರಾದರು. ಲಿಂಗನಾಥ, ವಾಸುದೇವ, ಶ್ರೀಕುಮಾರ್.. ಮೂವರು ಪುತ್ರರು, ಬಂಧುಗಳನ್ನು ಅಗಲಿದ್ದಾರೆ. ಈಚೆಗೆ ಕೆಲವು ವರುಷಗಳಿಂದ ಪುಣಚ ಸನಿಹದ ಅಜ್ಜಿನಡ್ಕದ 'ಓಂಕಾರಮೂಲೆ'ಯಲ್ಲಿ ವಾಸವಾಗಿದ್ದರು.
          ಮೊಂಟೆಪದವು ಶಾಲೆಯಲ್ಲಿ ಪತಿ ಪರಮೇಶ್ವರ ಕಾರಂತರೊಂದಿಗೆ ಗ್ರಾಮೀಣ ಶಾಲೆಯೊಂದನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ದಂಪತಿಗಳದ್ದು. ಜಾತಿ, ಮತ, ಬೇಧವಿಲ್ಲದೆ ಸಾಮಾನವಾಗಿ ಶಾಲೆಯನ್ನು, ವಿದ್ಯಾರ್ಥಿಗಳನ್ನು ಸಂಸ್ಕಾರ ಪಥದಲ್ಲಿ ಮುನ್ನಡೆಸಿದ್ದರು. ವಿದ್ಯಾರ್ಥಿಗಳ ನೆಚ್ಚಿನ ಅಧ್ಯಾಪಕರಾಗಿದ್ದರು. ಇವರಿಗೆ ಶಾಲೆಯೂ, ಮನೆಯೂ ಒಂದೇ ಆಗಿತ್ತು. ವ್ಯಾಪಕವಾದ ಸಾರ್ವಜನಿಕ ಸಂಪರ್ಕವಿತ್ತು. ರಜೆ, ಗಂಟೆ, ವೈಯಕ್ತಿಕವಾದ ಸುಖ-ದುಃಖಗಳನ್ನು ನೋಡದ ದುಡಿತ.
             ಲಕ್ಷ್ಮೀ ಕಾರಂತರಿಗೆ ಸಾಹಿತ್ಯ ಅಸಕ್ತಿ ಆಪಾರ. ಕವನ, ಹಾಡುಗಳನ್ನು ಬರೆಯುವುದು ಹವ್ಯಾಸ. ರೇಡಿಯೋ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ವಿದ್ಯಾರ್ಥಿಗಳನ್ನು ಸಾಹಿತ್ಯದತ್ತ ಹುರಿದುಂಬಿಸುತ್ತಿದ್ದರು. ಶಾಲಾ ವಾರ್ಶಿಕೋತ್ಸವಗಳ ಸಂದರ್ಭಗಳಲ್ಲಿ ಪ್ರತಿ ವರುಷ ಹೊಸತನ್ನು ಅಳವಡಿಸಿಕೊಂಡು ಜನಾನುರಾಗಿಯಾಗಿದ್ದರು. 'ಶಾಲೆಯ ಅಧ್ಯಾಪಕ ಒಂದು ಊರಿನ ಕಣ್ಣುಗಳಿದ್ದಂತೆ' ಎನ್ನುವ ಹಿರಿ ಮಾತನ್ನು ಅನುಷ್ಠಾನಿಸಿದ ನೆಗಳ್ತೆ ಇವರದು.
            ಮನೆಗೆ ಬಂದ ಅತಿಥಿಗಳನ್ನು ಆದರಿಸುವುದರಲ್ಲಿ ವಿಶೇಷಾಸಕ್ತಿ. ಅತಿಥಿಯ ಹೊಟ್ಟೆ ತುಂಬಿದಾಗ ಖುಷಿ ಪಡುವ ಗೃಹಿಣಿ. 2012ರಲ್ಲಿ ಪರಮೇಶ್ವರ ಕಾರಂತರು ವಿಧಿವಶರಾಗಿದ್ದರು. ಆ ಬಳಿಕ ಲಕ್ಷ್ಮೀ ಕಾರಂತರ ದೈಹಿಕವಾಗಿ ಕುಸಿದಿದ್ದರು. ಕಳೆದ ಆರು ವರುಷಗಳಲ್ಲಿ ಸಕ್ರಿಯತೆ ಕೈಕೊಟ್ಟಿತ್ತು.

Sunday, December 16, 2018

‘ಅಗುಳು’ ಕೃತಿಯ ಲೋಕಾರ್ಪಣೆ


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶ್ರೀ ಮುಳಿಯ ಜಯಶಂಕರ ಶರ್ಮರು ನನ್ನ ‘ಅಗುಳು’ ಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಇದು  ಉದಯವಾಣಿ ಅಂಕಣ ಬರಹ ‘ನೆಲದ ನಾಡಿ’ಯ ಸಂಕಲನ. 16 ದಶಂಬರ 2018ರಂದು ಪುತ್ತೂರು ಟೌನ್ ಬ್ಯಾಂಕಿನ ಸಭಾಭವನದಲ್ಲಿ ಲೋಕಾರ್ಪಣೆ. ಕ.ಸಾ.ಪ. ಪುತ್ತೂರು ಘಟಕದ ಬಿ.ಐತ್ತಪ್ಪ ನಾಯ್ಕರ ಅಧ್ಯಕ್ಷತೆ. ಜ್ಞಾನಗಂಗಾ ಪುಸ್ತಕ ಮಳಿಗೆಯ ಶ್ರೀ ಪ್ರಕಾಶ ಕುಮಾರ್ ಕೊಡೆಂಕಿರಿ ಉಪಸ್ಥಿತಿ.

Tuesday, December 11, 2018

ಶ್ರೀನಿವಾಸ ರಾವ್ - ಸಾವಿತ್ರಿ ದಂಪತಿಗೆ ಬೋಳಂತಕೋಡಿ ಕನ್ನಡ ಪ್ರಶಸ್ತಿ


                ಕನ್ನಡ ಸಾಹಿತ್ಯ ಪರಿಚಾರಕರು ಮತ್ತು ಮಕ್ಕಳಲ್ಲಿ ಅಕ್ಷರಪ್ರೀತಿ ಮೂಡಿಸುವ ಮಂಗಳೂರಿನ ಬಿ.ಶ್ರೀನಿವಾಸ ರಾವ್ ಮತ್ತು ಸಾವಿತ್ರಿ ಎಸ್.ರಾವ್ ದಂಪತಿ ಇವರು ಸಾಲಿನ 'ಬೋಳಂತಕೋಡಿ ಕನ್ನಡ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ದಶಂಬರ 15, ಶನಿವಾರ ಸಂಜೆ 5-00ಕ್ಕೆ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ  ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪುತ್ತೂರಿನ 'ಬೋಳಂತಕೋಡಿ ಅಭಿಮಾನಿ ಬಳಗ'ವು ಆಯೋಜಿಸುವ ಸಮಾರಂಭದಲ್ಲಿ ಪುತ್ತೂರು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಬೋಳಂತಕೋಡಿ ಈಶ್ವರ ಭಟ್ಟರ ಸಂಸ್ಮರಣೆ ನಡೆಯಲಿದೆ.
                ಸಮಾರಂಭದ ಅಧ್ಯಕ್ಷತೆಯನ್ನು ರಾಜೇಶ್ ಪವರ್ ಪ್ರೆಸ್ಸಿನ ಶ್ರೀ ಎಂಎಸ್.ರಘುನಾಥ್ ರಾವ್ ವಹಿಸಲಿದ್ದಾರೆ. ನ್ಯಾಯವಾದಿ ಶ್ರೀ ಕೆ.ಆರ್.ಆಚಾರ್ಯರು ಬೋಳಂತಕೋಡಿಯವರ ಸ್ಮೃತಿ ನಮನ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಕುರಿತು ಶ್ರೀಮತಿ ಸುಮಂಗಲಾ ರತ್ನಾಕರ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕದ ಅಧ್ಯಕ್ಷ ಶ್ರೀ ಬಿ.ಐತ್ತಪ್ಪ ನಾಯ್ಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬೋಳಂತಕೋಡಿ ಕನ್ನಡ ಪ್ರಶಸ್ತಿಯನ್ನು ಹಿಂದಿನ ವರುಷಗಳಲ್ಲಿ ಪಳಕಳ ಸೀತಾರಾಮ ಭಟ್, ಸಿದ್ಧಮೂಲೆ ಶಂಕರನಾರಾಯಣ ಭಟ್ (ದಿ.), ಬೆಂಡರವಾಡಿ ಸುಬ್ರಹ್ಮಣ್ಯ ಶರ್ಮ(ದಿ.) ಹರೇಕಳ ಹಾಜಬ್ಬ, ಕುಂಞಿಹಿತ್ಲು ಸೂರ್ಯನಾರಾಯಣ ಭಟ್, ಕವಯಿತ್ರಿ ನಿರ್ಮಲಾ ಸುರತ್ಕಲ್ ಮತ್ತು ಕು.ಗೋ.ಉಡುಪಿ ಇವರಿಗೆ ಪ್ರದಾನಿಸಲಾಗಿದೆ.
ಪುಸ್ತಕ ಹಬ್ಬ : ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ದಶಂಬರ 14ರಿಂದ 16 ತನಕ ದಿನಪೂರ್ತಿ 'ಪುಸ್ತಕ ಹಬ್ಬ' ಜರುಗಲಿದ್ದು ಪುಸ್ತಕ ಪ್ರದರ್ಶನ-ಮಾರಾಟ ವ್ಯವಸ್ಥೆಯಿದೆ.
                ಪ್ರಶಸ್ತಿ ಪುರಸ್ಕೃತರ ಪರಿಚಯ : ಮಂಗಳೂರಿನ ಬಿ.ಶ್ರೀನಿವಾಸ ರಾವ್ ಮತ್ತು ಸಾವಿತ್ರಿ ಎಸ್.ರಾವ್ ದಂಪತಿಗಳಿಗೆ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಯನ್ನು ಮೂಡಿಸುವ ಕನ್ನಡ ಕಾಯಕ. ಬದಲಾದ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಅಕ್ಷರಪ್ರೀತಿಯು ಮರೀಚಿಕೆಯಾಗಿದ್ದು, ಶಿಕ್ಷಣದ ಅಡಿಗಟ್ಟು ಪ್ರಾಥಮಿಕ-ಪ್ರೌಢ ಶಿಕ್ಷಣದಲ್ಲಿರುವುದನ್ನು ಮನಗಂಡ ಇವರು ವಿದ್ಯಾರ್ಥಿಗಳಿಗಾಗಿ ಕಥೆ, ಕವನಗಳ ಸಂಕಲನ; ಸಾಹಿತ್ಯಾಭಿರುಚಿ ಮತ್ತು ಓದುವ ಹವ್ಯಾಸವನ್ನು ರೂಢಿಸುವ ಸಾಹಿತ್ಯ ಶಿಬಿರಗಳು, ಮಕ್ಕಳ ಪ್ರತಿಭೆಗಳ ಮುಖವಾಗಿರುವ ಶಾಲಾ ಸಂಚಿಕೆಗಳ ಸ್ಪರ್ಧೆ,  ಮಕ್ಕಳ ಸಾಹಿತಿಗಳಿಗೆ ಪ್ರೋತ್ಸಾಹ, ಕವಿ ಕಾವ್ಯ ಗಾಯನ, ಮಕ್ಕಳ ನಾಟಕೋತ್ಸವ, ಮಕ್ಕಳ ಮೇಳ, ಮಕ್ಕಳ ಸಾಹಿತ್ಯ ವಿಚಾರಗೋಷ್ಠಿ, ಪುಸ್ತಕ ಪ್ರದರ್ಶನ ಹೀಗೆ ಅನ್ಯಾನ್ಯ ಕಲಾಪಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. 'ಮಕ್ಕಳು, ಮಕ್ಕಳಿಗಾಗಿ, ಮಕ್ಕಳೇ' ಮಾಡುವ 'ಮಕ್ಕಳ ಧ್ವನಿ' ತುಂಬು ಯಶ ಪಡೆದ ಕಾರ್ಯಕ್ರಮ. ದಶಕದೀಚೆಗೆ ಅವರ ಮನೆಯಲ್ಲಿ ಅಕ್ಷರಗಳು ಕುಣಿದಾಡುತ್ತಿವೆ! ಮಕ್ಕಳೊಂದಿಗೆ ಬೆರೆವ ಶ್ರೀನಿವಾಸ ರಾವ್ ದಂಪತಿಗಳು ಮಕ್ಕಳ ಮನಸ್ಸಿನೊಂದಿಗೆ ಸದಾ ಅನುಸಂಧಾನ ಮಾಡುತ್ತಿರುವ ಅಧ್ಯಾಪಕರು. ಇವರ ಇಳಿ ವಯಸ್ಸಿನ ಕಾಯಕದಲ್ಲಿ ಯುವಕರನ್ನು ನಾಚಿಸುವ ಕ್ರಿಯಾಶೀಲತೆಯಿದೆ.

Thursday, December 6, 2018

‘ಅಡಿಕೆ ಕೌಶಲ್ಯ ಪಡೆ’ ಶಿಬಿರ



ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಿಪಿಸಿಆರ್ ಐ ಆವರಣದಲ್ಲಿ ‘ಅಡಿಕೆ ಕೌಶಲ್ಯ ಪಡೆ’ ಶಿಬಿರವು ದಶಂಬರ 5ರಂದು ಶುಭಚಾಲನೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲರು ಉದ್ಘಾಟನೆ ಮಾಡಿದರು. ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ‍್ವವಿದ್ಯಾನಿಲಯದ ಕುಲಪತಿ ಡಾ. ಮಂಜುನಾಥ ಕೆ. ನಾಯ್ಕ್ ಅಧ‍್ಯಕ್ಷತೆ ವಹಿಸಿದ್ದರು. ಶಿಬಿರವು ದಶಂಬರ 5 ರಿಂದ 9ರ ತನಕ ನಡೆಯಲಿದೆ. ಮೂವತ್ತು ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.
ಈ ಸಂದರ್ಭದಲ್ಲಿ ‘ಜೀವ ರಕ್ಷೆಯ ಜೀವ ವಿಮೆ’ ವೀಡೀಯೋವನ್ನು ಶಾಸಕ ಸಂಜೀವ ಮಠಂದೂರು ಅನಾವರಣಗೊಳಿಸಿದರು. ವೀಡಿಯೋವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ, ಪ್ರಸಾದ್ ಬಲ್ನಾಡ್ ನಿರ್ಮಾಣ ಮಾಡಿದ್ದಾರೆ.
ಶಿಬಿರಕ್ಕೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ, ಅಡಿಕೆ ಪತ್ರಿಕೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಹಯೋಗ.